
ನಾರಾಯಣಪುರ ಡ್ಯಾಂಗೆ 67,500 ಕ್ಯೂಸೆಕ್ಸ್ ನೀರು ಬಿಡುಗಡೆ..!
ರಾಯಚೂರು/ವಿಜಯಪುರ : ಬರದ ಭೀತಿಯಲ್ಲಿದ್ದ ಕೃಷ್ಣಾ ಕೊಳ್ಳದ ರೈತರಿಗೆ ಇದೀಗ ಸಂತಸದ ಸುದ್ದಿ. ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ರಾಯಚೂರು ಸೇರಿದಂತೆ ಸುತ್ತಮುತ್ತಲಿನ ಭಾಗದ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ಸಿಕ್ಕಂತಾಗಿದೆ.
ಜಲಾಶಯ ಭರ್ತಿಯಾದ ಕಾರಣ ನಾರಾಯಣಪುರ ಜಲಾಶಯಕ್ಕೆ ಬರೋಬ್ಬರಿ 67,500 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.ಕೃಷ್ಣಾ ನದಿಯಲ್ಲಿ ಹರಿವು ಹೆಚ್ಚಾಗಿದ್ದು, ನಾರಾಯಣಪುರ ಜಲಾಶಯಕ್ಕೆ 43 ಸಾವಿರ ಕ್ಯೂಸೆಕ್ಸ್ ಒಳಹರಿವು ದಾಖಲಾಗಿದೆ.ಪ್ರಸ್ತುತ ನಾರಾಯಣಪುರ ಜಲಾಶಯದಲ್ಲಿ 12.786 ಟಿಎಂಸಿ ನೀರು ಸಂಗ್ರಹವಾಗಿದೆ.

ಆಲಮಟ್ಟಿ ಜಲಾಶಯ ಭರ್ತಿಯಾಗಿ ಕೃಷ್ಣಾ ನದಿಯಲ್ಲಿ ನೀರು ಹರಿಯುತ್ತಿರುವುದು ನದಿಗೆ ಜೀವಕಳೆ ತಂದಿದೆ. ಬರದ ಛಾಯೆಯ ನಡುವೆಯೂ ನೀರು ಬಿಡುಗಡೆಯಾಗಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಮಳೆ ಸುರಿದು ಒಳಹರಿವು ಮತ್ತಷ್ಟು ಹೆಚ್ಚಲಿ ಎಂದು ರೈತರು ಆಶಿಸುತ್ತಿದ್ದಾರೆ.
ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ನೀರಿನ ಮಟ್ಟದ ಮೇಲೆ ಸಂಬಂಧಪಟ್ಟ ಜಿಲ್ಲಾಡಳಿತಗಳು ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.
