BlogLatestTop Storiesರಾಷ್ಟ್ರೀಯ-National

ಪ್ರತ್ಯೇಕ ತಿರುಪತಿ ರಾಜ್ಯ ಕೋರಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

ಹೊಸದಿಲ್ಲಿ: ಧಾರ್ಮಿಕ ಪುಣ್ಯ ಕ್ಷೇತ್ರವಾದ ತಿರುಪತಿಗೆ ಪ್ರತ್ಯೇಕ ರಾಜ್ಯ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಶುಕ್ರವಾರ ಡಾ. ಕೆಎ ಪಾಲ್ ಅವರು ಮಂಡಿಸಿದ ವಾದವನ್ನು ಆಲಿಸಿದ ಬಳಿಕ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರ ಪೀಠವು ಈ ಆದೇಶವನ್ನು ನೀಡಿದೆ.

ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರುಮಲ ಲಡ್ಡುವಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐನಿಂದ ತನಿಖೆ ನಡೆಸುವಂತೆ ಪ್ರಜಾಶಾಂತಿ ಪಕ್ಷದ ಅಧ್ಯಕ್ಷ ಕೆಎ ಪಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ಜೊತೆಗೆ ತಿರುಮಲವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವಂತೆಯೂ ಕೇಳಿಕೊಂಡಿದ್ದರು.

ಮೇಲಿನ ಆರೋಪಗಳ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಮತ್ತು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಹಿಂದೂ ದೇವಾಲಯಗಳಲ್ಲಿ ಹೆಚ್ಚಿನ ಹೊಣೆಗಾರಿಕೆ ಸೇರಿದಂತೆ ಪರಿಹಾರಗಳನ್ನು ಕೋರಿ ಸುಮಾರು ಐದು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಅದರಂತೆ ಅಕ್ಟೋಬರ್ 4 ರಂದು ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸ್ವತಂತ್ರ ವಿಶೇಷ ತನಿಖಾ ತಂಡ (ಎಸ್‌ಐಟಿ) ಅನ್ನು ರಚಿಸಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಮ್ಮ ಕೋರಿಕೆಯಂತೆ ನಡೆದರೆ, ದೇಶದ ಎಲ್ಲಾ ದೇವಾಲಯಗಳು ಮತ್ತು ಗುರುದ್ವಾರಗಳನ್ನು ಪ್ರತ್ಯೇಕ ರಾಜ್ಯಗಳನ್ನಾಗಿ ಮಾಡಬೇಕಾಗುತ್ತದೆ ಎಂದು ಹೇಳಿದೆ. ನಿರ್ದಿಷ್ಟ ಧರ್ಮಕ್ಕೆ ಪ್ರತ್ಯೇಕ ರಾಜ್ಯ ರಚನೆಗೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

ತಿರುಮಲವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವಂತೆ ತಾವು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೇವಲ ಐದು ನಿಮಿಷಗಳಲ್ಲಿ ವಿಚಾರಣೆ ನಡೆಸಿದೆ. ತಮ್ಮ ಅರ್ಜಿಯ ವಿಚಾರಣೆಗೆ ಕೇವಲ ಐದು ನಿಮಿಷಗಳ ಸಮಯವನ್ನು ಮಾತ್ರ ಸುಪ್ರೀಂ ಕೋರ್ಟ್ ನೀಡಿತ್ತು. ಈ ಕುರಿತು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಎಂದು ಡಾ. ಕೆಎ ಪಾಲ್ ತಿಳಿಸಿದ್ದಾರೆ.

Share with Friends
author avatar
News Desk