Blogರಾಜ್ಯ-Karnataka

ಫಲ ನೀಡಿದ ನಿಖಿಲ್ ದೆಹಲಿ ಭೇಟಿ, ತಂಬಾಕು ಬೆಳೆ ಖರೀದಿ ಪ್ರಕ್ರಿಯೆ ಆರಂಭ

ನವದೆಹಲಿ: ಮೈಸೂರು ಭಾಗದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಅದರಂತೆ ತಂಬಾಕು ಖರೀದಿ ಪ್ರಕ್ರಿಯೆ ಶುರುವಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ದೆಹಲಿಯಲ್ಲಿ ನಿಖಿಲ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.ಈ ಬಗ್ಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಕೂಡ ನಮ್ಮ ನಿಯೋಗದಲ್ಲಿ ಇದ್ದು, ಗೋಯಲ್ ಅವರಿಗೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲ ಆಗುತ್ತಿದೆ ಎಂದು ನಿಖಿಲ್ ಅವರು ತಿಳಿಸಿದರು.

ಮೈಸೂರು ಜಿಲ್ಲೆಯ ಹುಣಸೂರು, ಹೆಚ್.ಡಿ.ಕೋಟೆ, ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ ಪ್ರದೇಶಗಳಲ್ಲಿ ರೈತರು ತಂಬಾಕು ಬೆಳೆಯುತ್ತಿದ್ದು, ಬೆಲೆ ಕುಸಿತದಿಂದ ಕಂಗೆಟ್ಟಿದ್ದಾರೆ. ರೈತರ ನೆರವಿಗೆ ಬರಬೇಕು ಎಂದು ಕೇಂದ್ರ ಸರ್ಕಾರದ ಗಮನ ಸೆಳೆಯಲಾಯಿತು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಕಳೆದ ಒಂದು ವಾರದಿಂದ ನಾನು ದೆಹಲಿಯಲ್ಲಿ ಇದ್ದೇನೆ. ಇಲ್ಲೇನು ನಾನು ಸುಮ್ಮನಿಲ್ಲ. ತಂಬಾಕು ಬೆಳೆಗಾರರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಪ್ರಕೃತಿಯ ವಿಕೋಪದಿಂದ ಒಳ್ಳೆಯ ಬೆಳೆ ಬಂದಿಲ್ಲ. ಗುಣಮಟ್ಟದ ತಂಬಾಕಿಗೆ ಕಂಪನಿಗಳು ಚನ್ನಾಗಿ ಹಣ ನೀಡುತ್ತಿವೆ. ಹೀಗಾಗಿ ಕೇಂದ್ರ ಸಚಿವರಾದ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ನೆರವಿಗೆ ಬರುವಂತೆ ಮನವಿ ಮಾಡಲಾಗಿದೆ ಎಂದರು ಅವರು.

ಬ್ರೆಜಿಲ್ ಸೇರಿದಂತೆ ಲ್ಯಾಟಿನ್ ಅಮೆರಿಕದ ದೇಶಗಳಲ್ಲಿ ಜನವರಿ ತಿಂಗಳ ವೇಳೆಗೆ ತಂಬಾಕು ಕಟಾವಿಗೆ ಬರಲಿದೆ. ಡಿಸೆಂಬರ್ ಒಳಗಾಗಿ ನಮ್ಮ ರೈತರ ತಂಬಾಕು ಮಾರಾಟ ಆಗಬೇಕಿದೆ. ಇದಕ್ಕೆ ಸಚಿವ ಪಿಯೂಷ್ ಗೋಯಲ್ ಅವರು ಹಾಗೂ ವಾಣಿಜ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Share with Friends
author avatar
News Desk