ಬೆಂಗಳೂರು-Bengaluru

ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ, ಬೆಂಗಳೂರಿನಲ್ಲಿಯೂ ಮಹಿಳೆ ಸಾವು

ಬೆಂಗಳೂರು : ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದ್ದು ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಒಬ್ಬ ಬಾಣಂತಿ ಪ್ರಾಣ ಕಳೆದುಕೊಂಡಿದ್ದಾಳೆ. ಅನುಷಾ ಮೃತಪಟ್ಟ ಬಾಣಂತಿ.

ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅನುಷಾ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ ರಾಜ್​ ನರ್ಸಿಂಗ್​​ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ಡೆಲಿವರಿಗೂ ಮುನ್ನ ಸ್ಕ್ಯಾನಿಂಗ್ ಮಾಡಿದಾಗ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ಸ್ಕ್ಯಾನಿಂಗ್​​​ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಡೆಲಿವರಿಯಾದ ಒಂದೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಅನುಷಾಗೆ ಆಪರೇಷನ್ ಮಾಡಲಾಗಿತ್ತು.

ಆಪರೇಷನ್ ಸಂದರ್ಭದಲ್ಲಿ ವೈದ್ಯರು ಅಲ್ಲಿಯೂ ಯಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಶಸ್ತ್ರಚಿಕಿತ್ಸೆ ಆದ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಜಾಂಡಿಸ್ ಇದೆ ಎಂದಿದ್ದರು.

ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

Share with Friends
author avatar
News Desk