
ಒಮಾನ್ ಕರಾವಳಿಯಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ ; ಅಮೆರಿಕ ವಿರುದ್ಧ ಭಾರತ ಆಕ್ರೋಶ
ನವದೆಹಲಿ, ಜೂನ್ 11: ಒಮಾನ್ ಕರಾವಳಿಯಲ್ಲಿ 24 ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ನಡೆದ ಅಮೆರಿಕದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಭಾರತವು ದೆಹಲಿಯಲ್ಲಿರುವ ಅಮೆರಿಕದ ಉನ್ನತ ರಾಜತಾಂತ್ರಿಕರಿಗೆ ಅಧಿಕೃತವಾಗಿ ಡಿಮಾರ್ಚ್ (Demarche) ಜಾರಿ ಮಾಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ನೀಡಿರುವ ಹೇಳಿಕೆಯ ಪ್ರಕಾರ, ಒಮಾನ್ ಕರಾವಳಿಯಲ್ಲಿ ಸಂಚರಿಸುತ್ತಿದ್ದ “ಸೆಟ್ಟೆಬೆಲ್ಲೊ” ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಹಡಗಿನಲ್ಲಿ 24 ಭಾರತೀಯ ಸಿಬ್ಬಂದಿ ಇದ್ದರು. ಇವರಲ್ಲಿ 21 ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆದರೆ ಮೂವರು ಭಾರತೀಯರು ಇನ್ನೂ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದೆ.
ಈ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಗಳು ಗಂಭೀರ ಕಳವಳಕ್ಕೆ ಕಾರಣವಾಗಿವೆ ಎಂದು ಭಾರತ ಅಭಿಪ್ರಾಯಪಟ್ಟಿದೆ. ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಪರಿಣಾಮವಾಗಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದೆ.
ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಪುನಃಸ್ಥಾಪನೆಯಾಗಲು ಉದ್ವಿಗ್ನತೆಯನ್ನು ತಕ್ಷಣ ಕಡಿಮೆ ಮಾಡಬೇಕು ಹಾಗೂ ರಾಜತಾಂತ್ರಿಕ ಮಾತುಕತೆಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.
ಇದೇ ವೇಳೆ, ವಾಣಿಜ್ಯ ಹಡಗು ಸಾಗಣೆ ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಯುವ ದಾಳಿಗಳು ತಕ್ಷಣ ನಿಲ್ಲಬೇಕು ಎಂದು ಭಾರತ ಹೇಳಿದೆ. ಅಂತರರಾಷ್ಟ್ರೀಯ ಕಾನೂನುಗಳ ಅನುಸಾರವಾಗಿ ಈ ಪ್ರದೇಶದ ಸಮುದ್ರ ಮಾರ್ಗಗಳಲ್ಲಿ ಮುಕ್ತ ಹಾಗೂ ಅಡೆತಡೆಯಿಲ್ಲದ ಸಂಚಾರವನ್ನು ಶೀಘ್ರದಲ್ಲೇ ಪುನಃಸ್ಥಾಪಿಸಬೇಕೆಂದು ಭಾರತ ಆಗ್ರಹಿಸಿದೆ.
