
ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ : ರಕ್ಕಸಕೊಪ್ಪ ಜಲಾಶಯ ಭರ್ತಿ
ಬೆಂಗಳೂರು,ಜು.30: ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರಿಂದ ಬೆಳಗಾವಿ ಜನರು ನಿಟ್ಟುಸಿರು ಬಿಡುವಂತಾಗಿದ್ದು,ಮುಂದಿನ 1 ವರ್ಷದವರೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇಲ್ಲ ಎಂಬ ವಿಶ್ವಾಸ ಮೂಡಿದೆ.
ಕಳೆದ ವರ್ಷ ಜೂನ್ ಮೂರನೇ ವಾರದಲ್ಲೇ ಜಲಾಶಯ ಭರ್ತಿಯಾಗಿದ್ದರೆ,ಈ ವರ್ಷ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿರುವುದು ಜಲಾಶಯ ಭರ್ತಿಗೆ ಪ್ರಮುಖ ಕಾರಣವಾಗಿದೆ.ಅಲ್ಲದೆ,ಮಳೆ ಕೊರತೆಯಿಂದ ಭರ್ತಿಯಾಗುವಿಕೆ ಸ್ವಲ್ಪ ತಡವಾಗಿದೆ.
ವಾಡಿಕೆಗಿಂತಲೂ ಮಳೆ ಕಡಿಮೆ ಆಗಿದ್ದರಿಂದ ಬೆಳಗಾವಿ ನಗರಕ್ಕೆ ಕುರಿತುವ ನೀರಿನ ಕೊರತೆ ಉಂಟಾಗುವ ಆತಂಕ ಎದುರಾಗಿತ್ತು. ಸದ್ಯ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆ ಜನರಿಗೆ ಕುಡಿಯುವ ನೀರಿನ ಕೊರತೆ ಆತಂಕ ದೂರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಕಂಡೇಯ ನದಿಗೆ ಅಡ್ಡಲಾಗಿ ನಿರ್ಮಿಸಲಾದ ರಕ್ಕಸಕೊಪ್ಪ ಜಲಾಶಯವು ಸುಮಾರು ಅರ್ಧ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ.ಜಲಾಶಯ ಭರ್ತಿಯಾಗಿರುವುದರಿಂದ ಬೆಳಗಾವಿ ನಗರಕ್ಕೆ ನಿರಂತರವಾಗಿ ಕುಡಿಯುವ ನೀರು ಪೂರೈಸಲು ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿದೆ.
