
ಶಾಸಕ ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಿದಕ್ಕೆ ಬೆಂಬಲಿಗನ ಹೈಡ್ರಾಮಾ..!
ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಮಂತ್ರಿ ಪಟ್ಟ ಕೈ ತಪ್ಪಿದ್ದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ಭಾರೀ ಹೈಡ್ರಾಮಾ ನಡೆಯಿತು.ಸುಬ್ಬಾರೆಡ್ಡಿ ಬೆಂಬಲಿಗನೊಬ್ಬ ಗುಡಿಬಂಡೆ ಪಟ್ಟಣದ ಪೆಟ್ರೋಲ್ ಬಂಕ್ ಬಳಿ ಪೆಟ್ರೋಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಶಾಸಕರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡ ಅಭಿಮಾನಿಯೊಬ್ಬ ಈ ಕೃತ್ಯಕ್ಕೆ ಮುಂದಾಗಿದ್ದಾನೆ.
ಸ್ಥಳದಲ್ಲಿ ನೆರೆದಿದ್ದ ಸುಬ್ಬಾರೆಡ್ಡಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್ ಬಾಟಲ್ ಕಿತ್ತುಕೊಳ್ಳಲು ಸ್ಥಳೀಯರು ಮತ್ತು ಪೊಲೀಸರು ಹರಸಾಹಸ ಪಟ್ಟರು. ಕೆಲಕಾಲ ಬಂಕ್ ಬಳಿ ಬಿಗು ವಾತಾವರಣ ನಿರ್ಮಾಣವಾಯಿತು.
ಕೊನೆಗೂ ಆತನನ್ನು ಸ್ಥಳೀಯ ʻಕೈʼ ಕಾರ್ಯಕರ್ತರು ಮನವೊಲಿಸಿದರು. ಆತನಿಗೆ ಧೈರ್ಯ ತುಂಬಿ ಆಸ್ಪತ್ರೆಗೆ ಕರೆದೊಯ್ದರು. ಸದ್ಯ ಆತನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಸುಬ್ಬಾರೆಡ್ಡಿ ಅವರನ್ನು ಗುರುತಿಸಿ ಸಚಿವ ಸ್ಥಾನ ನೀಡಬೇಕೆಂದು ಬೆಂಬಲಿಗರು ಒತ್ತಾಯಿಸಿದರು. ಘಟನೆಯಿಂದ ಗುಡಿಬಂಡೆಯಲ್ಲಿ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.
