
CWRC & CWMA ವಿರುದ್ಧ ಪಿಂಡ ಪ್ರದಾನ
ಮಂಡ್ಯ.ಆ.13: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ವಿನೂತನ ಪ್ರತಿಭಟನೆ ನಡೆಯಿತು.
ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿಯ ಕಾವೇರಿ ನದಿ ತೀರದಲ್ಲಿ ಪ್ರತಿಭಟನಾಕಾರರು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಪಿಂಡ ಪ್ರದಾನ ಹಾಗೂ ತರ್ಪಣ ನೆರವೇರಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದ ಪಾಲಿಗೆ ಎರಡೂ ಪ್ರಾಧಿಕಾರಗಳು ಸತ್ತಿವೆ ಎಂದು ಘೋಷಿಸಿದ ಪ್ರತಿಭಟನಾಕಾರರು,ಕಾವೇರಿ ನದಿಯಲ್ಲಿಯೇ ಎರಡೂ ಪ್ರಾಧಿಕಾರಗಳ ಹೆಸರಿನಲ್ಲಿ ಪಿಂಡ ಹಾಗೂ ತರ್ಪಣ ಬಿಟ್ಟು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಹೋರಾಟಗಾರರು ಆಗ್ರಹಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಹಾಗೂ ರಾಜ್ಯದ ಜಲ ಸಂಪನ್ಮೂಲದ ಮೇಲೆ ಅನ್ಯಾಯವಾಗದಂತೆ ಸರ್ಕಾರ ಕಟ್ಟುನಿಟ್ಟಿನ ನಿಲುವು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
