
ನೂತನ ಕಚೇರಿಗೆ ಪೂಜೆ ಮಾಡಿ ಕಾರ್ಯಾರಂಭ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ತಮ್ಮ ನೂತನ ಕಚೇರಿಯಲ್ಲಿ ದೇವತಾ ಪ್ರಾರ್ಥನೆ ಹಾಗೂ ಪೂಜಾ ಕಾರ್ಯಕ್ರಮ ನೆರವೇರಿಸಿದರು.
ವಿಧಾನಸೌಧದ ಕೊಠಡಿ ಸಂಖ್ಯೆ 262 ಹಾಗೂ 262(A)ರಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಚಿವರು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಅಧಿಕೃತವಾಗಿ ನೂತನ ಕಚೇರಿಗೆ ಪ್ರವೇಶಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಭೀಮಸೇನ ಬಿ. ಚಿಮ್ಮನಕಟ್ಟಿ, ಪಕ್ಷದ ಹಿರಿಯ ನಾಯಕರು, ಶಿಕ್ಷಣ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು, ಕಚೇರಿ ಸಿಬ್ಬಂದಿ, ಆತ್ಮೀಯರು ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದು ಸಚಿವ ಮಧು ಬಂಗಾರಪ್ಪ ಅವರಿಗೆ ಶುಭ ಹಾರೈಸಿದರು.
ನೂತನ ಕಚೇರಿಯಿಂದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡುವ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.
