
ಜಿಲ್ಲಾಧಿಕಾರಿ ಭವನದಲ್ಲೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನೌಕರ
ಧಾರವಾಡ: ಜಿಲ್ಲಾಧಿಕಾರಿ ಭವನದಲ್ಲಿ ಖಾದಿ ಗ್ರಾಮೋದ್ಯೋಗ ಇಲಾಖೆ ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಖಾದಿ ಗ್ರಾಮೋದ್ಯೋಗ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್ ಪಾಟೀಲ್ (32) ಎಂಬ ನೌಕರ ತನ್ನ ಕೈಗೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಚಾಕು ಇರಿದುಕೊಂಡ ಬಳಿಕ ತೀವ್ರ ರಕ್ತಸ್ರಾವವಾಗಿ ಖಾದಿ ಗ್ರಾಮೋದ್ಯೋಗ ಕಚೇರಿಯ ಮೆಟ್ಟಿಲುಗಳ ಮೇಲೆ ಶಿವಪ್ರಸಾದ್ ಪ್ರಜ್ಞೆ ತಪ್ಪಿ ಬಿದ್ದಿದ್ದನು. ಈ ವೇಳೆ ಅವರನ್ನು ಗಮನಿಸಿದ ಇಲಾಖೆಯ ಮೇಲಾಧಿಕಾರಿಗಳು ತಕ್ಷಣ ನೆರವಿಗೆ ಧಾವಿಸಿದ್ದಾರೆ.
ಬಳಿಕ ಹೊಯ್ಸಳ ವಾಹನದ ಮೂಲಕ ಶಿವಪ್ರಸಾದ್ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
