BlogLatestTop Storiesರಾಜ್ಯ-Karnataka

ಇನ್ಮುಂದೆ ಮನೆಯಿಂದ ವಾಹನ ಹೊರತೆಗೆಯುವ ಮುನ್ನ ಎಚ್ಚರ..?

ಬೆಂಗಳೂರು : ಇನ್ಮುಂದೆ ಮನೆಯಿಂದ ವಾಹನ ಹೊರತೆಗೆಯುವ ಮುನ್ನ ಹತ್ತು ಬಾರಿ ಯೋಚನೆ ಮಾಡಬೇಕಾಗಿದೆ, ಎಚ್ಚರ ತಪ್ಪಿದರೆ ಯಾವುದಾದರೊಂದು ಕಾರಣಕ್ಕೆ ದಂಡ ಕಟ್ಟುವುದು ಗ್ಯಾರಂಟಿ. ಏಕೆಂದರೆ ರಸ್ತೆಗಳ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ವಿಶೇಷವಾದ ಕಾರ್ಯಾಚರಣೆಗಳನ್ನು ನಡೆಸುವ ಕುರಿತಂತೆ ಸಂಚಾರ ಮತ್ತು ರಸ್ತೆಗಳ ಸುರಕ್ಷತೆಗಳ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಆಲೋಕ್ ಕುಮಾ‌ರ್ ಅವರು ಸೂಚನೆಯನ್ನು ನೀಡಿದ್ದಾರೆ.

ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇಲ್ಲಿಯವರೆಗೆ ನಿಗದಿ ಪಡಿಸಿದ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ ಕೇವಲ ದಂಡ ವಿಧಿಸಲಾಗುತ್ತಿತ್ತು. ಆದರೆ ಆಗಸ್ಟ್‌ 1 ರಿಂದ ದಂಡದ ಜೊತೆ ಪ್ರಕರಣ ಸಹ ದಾಖಲಿಸಲಾಗುವುದು ಎಂದು ಅಲೋಕ್‌ ಕುಮಾರ್‌ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭಾರೀ ಸಂಖ್ಯೆಯಲ್ಲಿ ಅಪಘಾತವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವೇಗದ ಮಿತಿಯನ್ನು ವಿಧಿಸಲಾಗಿದೆ. ಗರಿಷ್ಠ ಗಂಟೆಗೆ 100 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸಲು ಅನುಮತಿ ನೀಡಲಾಗಿದೆ. ಗಂಟೆಗೆ 105 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸಿದರೆ ರಸ್ತೆಯಲ್ಲಿ ಅಳವಡಿಸಿದ ಎಐ ಕ್ಯಾಮೆರಾ ಕ್ಲಿಕ್ಕಿಸಿದ ಫೋಟೋ ಆಧಾರದ ಮೇಲೆ ಮಾಲೀಕರಿಗೆ ದಂಡದ ನೋಟಿಸ್‌ ಕಳುಹಿಸಲಾಗುತ್ತದೆ.

ಅತಿ ವೇಗವು 90% ಮಾರಣಾಂತಿಕ ಅಪಘಾತಗಳಿಗೆ ಕಾರಣವಾಗುತ್ತದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ 155 ಮಂದಿ ಗಂಟೆಗೆ 130 ಕಿ.ಮೀ.ಗೂ ಹೆಚ್ಚು ವೇಗದಲ್ಲಿ ಸಂಚರಿಸಿದ್ದಾರೆ. ಇನ್ನು ಮುಂದೆ ಆಗಸ್ಟ್‌ 1 ರಿಂದ ಕರ್ನಾಟಕದಲ್ಲಿ 130 ಕಿಮೀಗಿಂತ ಹೆಚ್ಚಿನ ವೇಗದಲ್ಲಿ ಚಾಲನೆ ಮಾಡಿದರೆ ಎಫ್‌ಐಆರ್‌ ದಾಖಲಿಸಲಾಗುತ್ತದೆ.

ಎಕ್ಸ್‌ಪ್ರೆಸ್‌ವೇಯಲ್ಲಿ ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೊರೆ ಹೊಗಿದ್ದು ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ ನಂಬರ್‌ನಿಂದ ಆರ್‌ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರುತ್ತದೆ.

ನಿರ್ಬಂಧಿತ ಮಾರ್ಗದಲ್ಲಿ ವಾಹನ ಚಲಾಯಿಸುತ್ತಿರುವುದು ಕಂಡುಬಂದರೆ, ಸಂಚಾರ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸರು ಹೊಸ ನಿಯಮ ಜಾರಿಗೊಳಿಸುತ್ತಿದ್ದಾರೆ. ಪೊಲೀಸರು ಆಗಸ್ಟ್ 1 ರಿಂದ ರಾಂಗ್ ಸೈಡ್ ಡ್ರೈವಿಂಗ್, ಫುಟ್‌ಪಾತ್ ಡ್ರೈವಿಂಗ್ ಮತ್ತು ದೋಷಯುಕ್ತ ನಂಬರ್ ಪ್ಲೇಟ್‌ಗಳ ವಿರುದ್ಧ ಜಾಗೃತಿ ಅಭಿಯಾನವನ್ನು ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಆಗಸ್ಟ್ 31 ರೊಳಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆಗಳ ಅಪಘಾತಗಳನ್ನು ತಡೆಗಟ್ಟುವಂತಹ ನಿಟ್ಟಿನಲ್ಲಿ ಈಗಾಗಲೇ ಅತಿ ಪ್ರಖರದ ಬೆಳಕನ್ನು ಹೊರಹಾಕುವ ಮತ್ತು ಕಣ್ಣು ಕುಕ್ಕುವಂತಹ LED ಲೈಟ್‌ ಗಳನ್ನು ಅಳವಡಿಸಿರುವಂತಹ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷವಾದ ಕಾರ್ಯಾಚರಣೆಯನ್ನು ನಡೆಸುವಂತೆ ಸೂಚನೆಯನ್ನು ನೀಡಲಾಗಿದೆ.

ಬೆಂಗಳೂರಿನಲ್ಲಿ ಯಾವುದೇ ಪ್ರಯಾಣಿಕರು ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸುವುದು ಕಂಡುಬಂದರೆ ಅವರ ವಿರುದ್ಧ BNS ನ ಸೆಕ್ಷನ್ 281 ಮತ್ತು IMV ಯ 184 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತದೆ.

Share with Friends
author avatar
News Desk