BlogLatestರಾಜಕೀಯ | Politicsರಾಜ್ಯ-Karnataka

ಕೊಲೆ ಬೆದರಿಕೆ, ಜಾತಿ ನಿಂದನೆ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್, ಬಂಧನ ಭೀತಿ

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ರಿಂದ ಜಾತಿ ನಿಂದನೆ ವಿಚಾರವಾಗಿ ಶಾಸಕ ಮುನಿರತ್ನ ಅವರು ಬಂಧನ ಭೀತಿ ಎದುರಿಸುವಂತಾಗಿದ್ದು, ಎರಡು ಸಮುದಾಯಗಳ ನಿಂದನೆ ಕೇಸ್ ನಿಂದ ಮುನಿರತ್ನ ವಿರುದ್ಧ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರ ನಡುವೆ ನಡೆದ ಸಂಭಾಷಣೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬೆಂಗಳೂರು ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸದ್ಯ ಮುನಿರತ್ನ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಪೊಲೀಸರು ಬಂಧಿಸಬಹುದು ಎಂಬ ಭೀತಿಯಿಂದ ಶುಕ್ರವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. ಆಪ್ತ ಸಹಾಯಕನ ಜೊತೆ ಹೊರಹೋಗಿ ಬರುತ್ತೇನೆಂದು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದ ಮುನಿರತ್ನ ಎಲ್ಲಿದ್ದಾರೆಂಬುದು ಗೊತ್ತಿಲ್ಲ.

ಈ ನಡುವೆ ತಮ್ಮ ವಿರುದ್ದದ ಎಫ್‌ಐಆರ್‌ ದಾಖಲಾಗಿರುವ ಕುರಿತಂತೆ, ಎರಡು ಸಮುದಾಯಗಳ ನಿಂದನೆಯಲ್ಲಿ ಸಿಲುಕಿರುವ‌ ಶಾಸಕ ಮುನಿರತ್ನ. ಒಕ್ಕಲಿಗ ಹಾಗೂ ದಲಿತ ಸಮುದಾಯಗಳ ನಿಂದನೆಯಿಂದ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಮುನಿರತ್ನ ನಿನ್ನೆಯಿಂದಲೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡದೇ ದೂರ ಉಳಿದುಕೊಂಡಿದ್ದಾರೆ. ರಹಸ್ಯ ಸ್ಥಳದಲ್ಲಿ ಇದ್ದುಕೊಂಡು ತಮ್ಮ ವಕೀಲರ ಜೊತೆ ಮುನಿರತ್ನ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕಾನೂನು ಹೋರಾಟ ಹಾಗೂ ಜಾತಿ ನಿಂದನೆ ಆರೋಪದಿಂದ ಹೊರಗೆ ಬರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ವಪಕ್ಷದ ನಾಯಕರ ಆಕ್ರೋಶ “
ಜಾತಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ವಿರುದ್ದ ತಮ್ಮದೇ ಪಕ್ಷದ ಶಾಸಕನ ಮಾತು ಖಂಡಿಸಿ ವಿಧಾನ ಪರಿಷತ್‌ ವಿಪಕ್ಷ ನಾಯಕರಾಗಿರುವ ಛಲವಾದಿ ನಾರಯಣಸ್ವಾಮಿ ಅವರು ಕ್ರಮಕ್ಕೆ ಆಗ್ರಹಿಸಿದ್ದಾರೆ. ನಾನು ಈ ಕುರಿತು ಈಗಾಗಲೇ ಹಿರಿಯರ ಗಮನಕ್ಕೆ ತಂದಿದ್ದೇನೆ. ಕ್ರಮ ಕೈಗೊಳ್ಳಿ ಅಂತ ಹೇಳಿದ್ದೇನೆ. ಜಾತಿ, ಧರ್ಮ ನಿಂದನೆ ಮಾಡಿದವರನ್ನು ನಾವು ಬೆಂಬಲಿಸಲ್ಲ. ಸಹಿಸೋದಿಲ್ಲ ಇದು ನಮ್ಮ ಪಕ್ಷದ ನಿರ್ಧಾರ ಎಂದರು.

ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ?
ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿಯಿಂದ ಉಚ್ಚಾಟಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ
ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಹಾಗೂ ವಿಧಾನಸಭಾ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಆಗ್ರಹಿಸಿದರು.

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ ಸಂಘರ್ಷಗಳು ಹೆಚ್ಚಾಗುತ್ತವೆ. ಆದ ಕಾರಣಕ್ಕೆ ಇವರ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿ ಕೇಂದ್ರ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಕೀಳು ಮಟ್ಟದ ಪದ ಬಳಕೆ ಮಾಡಿರುವ ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದರು.

ರಾಜಕೀಯ ಒತ್ತಡ :
ಇನ್ನು ಮುನಿರತ್ನ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಶಥಾಯಗಥಾಯ ಅವರನ್ನು ಬಂಧಿಸಲು ಆಡಳಿತಾರೂಢ ಕಾಂಗ್ರೆಸ್ನಲ್ಲಿರುವ ಕೆಲವು ಪ್ರಭಾವಿಗಳು ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.

Share with Friends
author avatar
News Desk