ಬಿಹಾರದ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ, 7 ಭಕ್ತರು ಸಾವು
ಪಾಟ್ನಾ: ಬಿಹಾರದ ಜಿಹಾನಾಬಾದ್ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಜನಸಂದಣಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಲಘು ಲಾಠಿ ಪ್ರಹಾರ ಮಾಡಿದ ಪರಿಣಾಮ ಕಾಲ್ತುಳಿತ ಉಂಟಾಗಿ 3 ಮಹಿಳೆಯರು ಸೇರಿ 7 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.
ಶ್ರಾವಣ ಮಾಸದ 4ನೇ ಸೋಮವಾರದಂದು ಬರಾವರ್ ಬೆಟ್ಟದ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 35 ಮಂದಿ ಗಾಯಗೊಂಡಿದ್ದಾರೆ.
ಪ್ರತಿ ವರ್ಷ ಪವಿತ್ರ ಶ್ರಾವಣ ಮಾಸದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಅದೇ ರೀತಿ ಭಾನುವಾರ ತಡರಾತ್ರಿಯಿಂದಲೇ ಭಕ್ತರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಶಿವನಿಗೆ ಜಲಾಭಿಷೇಕ ಅರ್ಪಿಸಲು ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ನೂಕುನುಗ್ಗಲು ಶುರುವಾಗಿತ್ತು. ಜನಸಂದಣಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಬಲಪ್ರಯೋಗ ನಡೆಸಿದ್ದರಿಂದ ಕಾಲ್ತುಳಿತ ಉಂಟಾಗಿದೆ.
ಈ ವೇಳೆ ಆಡಳಿತದ ಅವ್ಯವಸ್ಥೆಯಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ದೇವಾಲಯದಲ್ಲಿ ಹಾಜರಿದ್ದವರು ದೂರಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಹತ್ರಾಸ್ನ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾಗಿ ಹತ್ತಾರು ಮಂದಿ ಸಾವನ್ನಪ್ಪಿದ್ದರು. ಅದೇ ರೀತಿಯ ಘಟನೆ ಬಿಹಾರದಲ್ಲಿ ನಡೆದಿದೆ.
