ಸಿದ್ದರಾಮ್ಯಯ ರಾಜೀನಾಮೆಗೆ ಒತ್ತಾಯಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ
ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್ ಮಂಗಳವಾರ ಪುರಸ್ಕರಿಸಿದ್ದು, ಇಂದು ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಸಿಎಂ ಸಿದ್ದರಾಮ್ಯಯ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಘೇರಾವ್ ಹಾಕಿದ್ದು, ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ದ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸದ ಬಳಿ ಜಮಾಯಿಸಿದ್ದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಕಾರ್ಯಕರ್ತರು ಬ್ಯಾರಿಕೆಡ್ ನಿಂದ ಒಳಗೆ ನುಗ್ಗಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರ ಪ್ರಯತ್ನವನ್ನು ತಡೆದ ಪೊಲೀಸರು, ಕೆಲವರನ್ನು ವಶಕ್ಕೆ ಪಡೆದು ಸ್ಥಳದಿಂದ ಹೊತ್ತೊಯ್ದಿದ್ದಾರೆ.
ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಪ್ರಕರಣ ವಿಚಾರಣೆಯಲ್ಲಿದ್ದು ಇಂದೂ ಸಹ ಸಿಎಂ ವಿರುದ್ದವಾಗಿ ತೀರ್ಪು ಬಂದರೆ ಸಿದ್ದರಾಮಯ್ಯ ಅವರಿಗೆ ಹಿನ್ನೆಡೆಯಾಗಲಿದೆ. ಈ ಕುರಿತು ವಿಚಾರಣೆ ನಡೆಯುತ್ತಿದ್ದು, ಕೋರ್ಟ್ ಕೆಲಕಾಲ ವಿಚಾರಣೆಯನ್ನು ಮುಂದೂಡಿದೆ.
