LatestTop Storiesರಾಜ್ಯ-Karnataka

ಕರ್ನಾಟಕಕ್ಕೆ ಸಂಕಷ್ಟ: ತಮಿಳುನಾಡಿಗೆ 15 ದಿನ 12 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸಲು CWRC ಶಿಫಾರಸು

ಬೆಂಗಳೂರು: ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರಿನ ಸಂಕಷ್ಟ ಎದುರಾಗಿದೆ. ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ. ಮುಂದಿನ 15 ದಿನಗಳ ಕಾಲ ನೀರು ಬಿಡುವಂತೆ ಸೂಚಿಸಲಾಗಿದೆ.

CWRC ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಖುದ್ದು ಹಾಜರಾಗಿ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹಾಗೂ ವಸ್ತುಸ್ಥಿತಿಯನ್ನು ಸಮಿತಿಯ ಮುಂದೆ ವಿವರಿಸಿದರು.

ರಾಜ್ಯದಲ್ಲಿ ಮಳೆಯ ಕೊರತೆ, ಜಲಾಶಯಗಳಲ್ಲಿನ ನೀರಿನ ಸಂಗ್ರಹ ಹಾಗೂ ಒಳಹರಿವಿನ ಪರಿಸ್ಥಿತಿಯನ್ನು ಕರ್ನಾಟಕದ ಅಧಿಕಾರಿಗಳು ಸಭೆಯಲ್ಲಿ ಪ್ರಸ್ತಾಪಿಸಿದರು. ನಿತ್ಯ ಒಂದು ಟಿಎಂಸಿ ನೀರು ಹರಿಸುವುದು ಹೇಗೆ ಸಾಧ್ಯ? ಇಷ್ಟು ಪ್ರಮಾಣದ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯದ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಭವಿಷ್ಯದ ಮಳೆ ಪ್ರಮಾಣ, ಜಲಾಶಯಗಳ ನೀರಿನ ಸಂಗ್ರಹ ಮತ್ತು ರಾಜ್ಯದ ನೀರಿನ ಲಭ್ಯತೆ ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿದ ಬಳಿಕ CWRC ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿದೆ.

ಈ ಶಿಫಾರಸಿನ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಡೆಯಲಿದ್ದು, ಅಂತಿಮ ಆದೇಶ ಹೊರಬೀಳುವ ಸಾಧ್ಯತೆ ಇದೆ.

ನೀರು ಬಿಡುಗಡೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸೂಚನೆ ನೀಡಿದ್ದಾರೆ.

“12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಆದೇಶ ಬಂದಿದೆ. ಒಳಹರಿವನ್ನು ಗಮನಿಸುತ್ತೇವೆ. ರೈತರ ಹಿತವನ್ನು ಕಾಪಾಡಬೇಕು. ಕೋರ್ಟ್ ಆದೇಶವನ್ನು ಪಾಲಿಸಬೇಕು. ನೀರಾವರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಳೆಗಳನ್ನು ಉಳಿಸಬೇಕಾಗಿದೆ. ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ನೀರಾವರಿ ವಿಚಾರದಲ್ಲಿ ತಾವು ಪಾರದರ್ಶಕವಾಗಿದ್ದು, ಈ ವಿಚಾರದಲ್ಲಿ ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

“ನಾವು ರೈತರ ಬದುಕನ್ನು ಕಾಪಾಡುತ್ತೇವೆ. ರೈತರು ತಾಳ್ಮೆಯಿಂದ ಇರಬೇಕು. ಪ್ರಕೃತಿ ನಮಗೆ ಸಹಕಾರ ನೀಡಲಿದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಮಂಡ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಪ್ರತಿಭಟನೆಗಳ ಸಾಧ್ಯತೆ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

Share with Friends
author avatar
News Desk