ಅಗತ್ಯವೆನಿಸಿದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಪರಮೇಶ್ವರ್
ತುಮಕೂರು: ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಬಂಧನವಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ (G Parameshwara) ತುಮಕೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ನೀಡಿರುವ ನೋಟಿಸ್ಹೆ ಯಡಿಯೂರಪ್ಪ ಬಂದು ಉತ್ತರ ನೀಡ ಬೇಕಾಗುತ್ತದೆ ಎಂದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯ ಇದ್ದಲಿ ಸಿಐಡಿಯವರು ಯಡಿಯೂರಪ್ಪರನ್ನ ಬಂಧಿಸ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪೋಕ್ಸೊ ಕೇಸ್ನಲ್ಲಿ ಯಡಿಯೂರಪ್ಪ ಬಂಧಿಸಲು ಸಿಐಡಿ ಸಿದ್ಧತೆ
ಯಡಿಯೂರಪ್ಪ ಹೇಳಿದ್ದೇನು?
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇಂದು ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ, ಅಪಾಯ ಮನಗಂಡ ಯಡಿಯೂರಪ್ಪ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ಗೂ ಉತ್ತರ ನೀಡಿರುವ ಅವರು, ಜೂನ್ 17 ರಂದು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ನಟ ದರ್ಶನ್ ಮನೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್
ಮಾರ್ಚ್ 28 ರಂದು ನೀಡಿದ್ದ ನೋಟಿಸ್ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಾನು ಜೂನ್ 17 ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಶವ ಸಾಗಿಸಲು ಬಳಕೆ ಮಾಡಿದ ಸ್ಕಾರ್ಪಿಯೋ ಸೀಜ್
