BlogLatestರಾಜ್ಯ-Karnataka

ಬಾಲ್ಯದ ಕಷ್ಟದ ದಿನಗಳನ್ನು ನೆನೆದ ಸಿಎಂ ಸಿದ್ದರಾಮಯ್ಯ

ಮೈಸೂರು : ಹಬ್ಬ ಬಂದಾಗ ಮಾತ್ರ ನಮ್ಮ ಮನೆಯಲ್ಲಿ ಅನ್ನ ಮಾಡ್ತಿದ್ರು. ಅಕ್ಕ ಪಕ್ಕದವರ ಮನೆಯಲ್ಲಿ ಯಾರಿಗಾದ್ರೂ ಹುಷಾರು ತಪ್ಪಿದರೆ ಅವರಿಗೆ ಅನ್ನ ಮಾಡ್ತಿದ್ರು. ಅವರ ಮನೆ ಬಾಗಿಲಲ್ಲಿ ಒಂದು ತುತ್ತು ಅನ್ನಕ್ಕಾಗಿ ಕಾದು ನಿಂತಿದ್ದ ದಿನಗಳು ಇದ್ದವು‌. ಹೀಗೆ ಅನ್ನಕ್ಕೆ ಯಾರೂ ಕಾದು ನಿಲ್ಲಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಾಲ್ಯದ ದಿನಗಳನ್ನು ಮೆಲುಕುಹಾಕಿದ್ದಾರೆ.

ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.

1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ ಎನ್ನುತ್ತಾ ತಮ್ಮ ಬಾಲ್ಯದ ಬಡತನದ ದಿನಗಳನ್ನು ಸ್ಮರಿಸಿದರು.

ಜಾತಿ ಕಾರಣಕ್ಕಾಗಿ ಸಮಾಜದಲ್ಲಿ ಆರ್ಥಿಕ‌ ಅಸಮಾನತೆ ಸೃಷ್ಟಿ ಆಯಿತು. ಆದ್ದರಿಂದ ಎಲ್ಲರಿಗೂ ಆರ್ಥಿಕ ಶಕ್ತಿ ಕೊಡುವ ಕಾರಣಕ್ಕೆ 2013-18 ರ ವರೆಗೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆವು. ಹಾಗೆಯೇ ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು ಎಂದರು.

ನಮ್ಮ ಭಾಗ್ಯಗಳನ್ನು, ಗ್ಯಾರಂಟಿಗಳನ್ನು ವಿರೋಧಿಗಳು ಆಡಿಕೊಂಡರು. ಈಗಲೂ ಅಪ ಪ್ರಚಾರ ಮಾಡುತ್ತಿದ್ದಾರೆ. ಆದರೆ ನಾನು ಹೋದಲ್ಲಿ ಬಂದಲ್ಲಿ ಗ್ಯಾರಂಟಿಗಳ ಫಲಾನುಭವಿಗಳು ಕಾಂಗ್ರೆಸ್ ಸರ್ಕಾರಕ್ಕೆ ಧನ್ಯತೆ ಅರ್ಪಿಸುತ್ತಿದ್ದಾರೆ ಎನ್ನುತ್ತಾ ಉಚಿತ ಯೋಜನೆಗಳ ಫಲಾನುಭವಿಗಳು ಗೃಹಲಕ್ಷ್ಮಿ ಹಣದಲ್ಲಿ ಮಾಡಿದ ಸಾಧನೆಗಳನ್ನು ವಿವರಿಸಿದರು.

ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು ಎಂದರು.

ಡಾ.ಡಿ.ಶ್ರೀನಿವಾಸ ಮಣಗಳ್ಳಿ ಅವರ ಸಂಪಾದನಾ ಕೃತಿ ಬಿಡುಗಡೆಯ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪುರುಷೋತ್ತಮ ಬಿಳಿಮಲೆ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ನಾಟಕಕಾರರಾದ ಕೆ.ವೈ.ನಾರಾಯಣಸ್ವಾಮಿ, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾದ ಪ್ರೊ.ಎಂ.ಚಂದ್ರ ಪೂಜಾರಿ, ಕುಲಪತಿಗಳಾದ ಪ್ರೊ.ಎನ್.ಕೆ.ಲೋಕನಾಥ್, ಸಾಮಾಜಿಕ ಕಾರ್ಯಕರ್ತರಾದ ಅಹಿಂದ ಜವರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Share with Friends
author avatar
News Desk