BlogLatestTop Storiesರಾಜ್ಯ-Karnataka

ಪ್ರಧಾನಿ ಮೋದಿ ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭಾಟಿಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು, ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಈ ಹಿಂದೆ ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ಅತಿ ಹೆಚ್ಚು ತೆರಿಗೆ ನೀಡುವ ನಗರವಾಗಿದೆ. ಈ ನಗರಕ್ಕೆ ಬಜೆಟ್‌ನಲ್ಲಿ ಏನೂ ದೊರೆತಿಲ್ಲ. ಮಹಾರಾಷ್ಟ್ರದಂತೆ ನಮ್ಮನ್ನು ಪರಿಗಣಿಸಬೇಕು. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜೆಎನ್ ನರ್ಮ್ ಯೋಜನೆ ಅಡಿ ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಾಳ, ನೆಲಮಂಗಲ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು ಎಂದರು.

ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಮಾಡಲು ಸಾಧ್ಯ. ಎರಡು ಪ್ರದೇಶಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ತಿಳಿದರು. ರಾಜ್ಯ ರಾಜಧಾನಿಯಲ್ಲಿ ನೂತನವಾಗಿ ಒಂದಷ್ಟು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಆದ ಕಾರಣ ಈ ಯೋಜನೆಗಳಿಗೂ ಕೇಂದ್ರ ಸರ್ಕಾರ ನೆರವಾಗಬೇಕು ಎಂದು ಕೇಳಲಾಗಿದೆ. ಬೆಂಗಳೂರಿಗೆ ಹೊರಗಿನಿಂದ ಹೆಚ್ಚಿನ ಜನ ಬರುತ್ತಿದ್ದಾರೆ.

ಜೊತೆಗೆ ನಗರದ ಮೂಲಸೌರ್ಕಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡಬೇಕಿದೆ. ಇದಕ್ಕೆ ಅನುದಾನದ ಅವಶ್ಯಕತೆಯಿದೆ ಎಂದು ಪ್ರಧಾನಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: 2024ರ ಕೇಂದ್ರ ಬಜೆಟ್‌ನಲ್ಲಿ ಯುವಜನತೆಗಾಗಿ ಹೊಸ ಇಂಟರ್ನ್‌ಶಿಪ್‌ ಯೋಜನೆ; ಏನಿದು ಸ್ಕೀಮ್?‌

ಭದ್ರಾ ಮೇಲ್ದಂಡೆ ಯೋಜನೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ:
ಕಳೆದ ಬಜೆಟ್ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿತ್ತು. ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮಳೆ ವಿಚಾರ, ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಬೇಕಿತ್ತು. 84 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ ಎಂದು ತಿಳಿಸಿದೆವು. ಒಂದು ಸಭೆ ನಡೆಸಿ ಮಹದಾಯಿ ಯೋಜನೆ ಸಮಸ್ಯೆ ಬಗೆಹರಿಸಬಹುದು ಎಂದು ಅವರ ಗಮನಕ್ಕೆ ತಂದೆವು. ಮೇಕೆದಾಟು ವಿಚಾರವಾಗಿ ನೀವುಗಳೇ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಉತ್ತಮ ಎಂದು ಸಲಹೆ ನೀಡಿದರು. ಈ ವಿಚಾರದಲ್ಲಿ ಕೇಂದ್ರ ಮಧ್ಯಸ್ತಿಕೆ ವಹಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದರು.

Share with Friends
author avatar
News Desk