BlogLatestTop Storiesರಾಜಕೀಯ | Politicsರಾಜ್ಯ-Karnataka

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ, ವಕ್ಫ್ ವಿವಾದ ಬಿಜೆಪಿ ಸೃಷ್ಟಿ : ಡಿಕೆಶಿ

ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಬಗ್ಗೆ ಕೇಳಿದಾಗ, ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ.

ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಬೊಮ್ಮಾಯಿ ಅವರ ಸರ್ಕಾರವೇ ನೋಟೀಸ್ ನೀಡಿದೆ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ.

ಮಹಾರಾಷ್ಟ್ರ ಹಾಗೂ ರಾಜ್ಯದ ಉಪಚುನಾವಣೆ ಸಮಯದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಜನ ಬಹಳ ಬುದ್ಧಿವಂತರು ಅವರಿಗೆ ಜನ ತಕ್ಕ ರೀತಿ ಪಾಠ ಕಲಿಸಲಿದ್ದಾರೆ. ನಾವು ದಾಖಲೆಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ” ಎಂದರು.

ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಜೆಸಿಪಿ ರಾಜ್ಯಕ್ಕೆ ಭೇಟಿ ನೀಡುವುದಾದರೆ ಸರ್ಕಾರ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಡೀ ಸಮಿತಿ ತಂಡ ಭೇಟಿ ನೀಡಬೇಕು. ಕೇವಲ ಸಮಿತಿ ಅಧ್ಯಕ್ಷರು ಬಂದಿದ್ದಾರೆ ಎಂದರೆ ಅವರು ಪಕ್ಷದ ಕೆಲಸಕ್ಕಾಗಿ ಬಂದಿದ್ದಾರೆ. ಅವರು ಸಂಸದರಾದ ಬೊಮ್ಮಾಯಿ ಹಾಗೂ ಸಚಿವ ಸೋಮಣ್ಣ ಅವರ ಜತೆ ಬಂದಿದ್ದಾರೆ.

ಇವರಿಬ್ಬರು ಜೆಪಿಸಿ ಸದಸ್ಯರೇ? ಭೇಟಿ ನೀಡಿರುವವರು ಕೇವಲ ಬಿಜೆಪಿ ಸದಸ್ಯರು ಮಾತ್ರ, ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ. ಅವರು ಏನಾದರೂ ರಾಜಕೀಯ ಮಾಡಲಿ. ಸತ್ಯಾಂಶವೇ ಬೇರೆ” ಎಂದು ತಿಳಿಸಿದರು.

Share with Friends
author avatar
News Desk