Latestರಾಜ್ಯ-Karnatakaರಾಷ್ಟ್ರೀಯ-National

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್‌ ಸಿಗ್ನಲ್‌..!

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ. ಹಳೆಯ ಹಾಗೂ ಹೊಸ ಮುಖಗಳ ನಡುವೆ ಸಮತೋಲನ ಸಾಧಿಸುವ ಉದ್ದೇಶದಿಂದ ಹೈಕಮಾಂಡ್ ಹೊಸ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ, ಈ ಬಾರಿ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಹೆಚ್ಚಿದ್ದು, ಪ್ರಾದೇಶಿಕ ಹಾಗೂ ಜಾತಿ ಸಮೀಕರಣವನ್ನೂ ಗಮನದಲ್ಲಿಟ್ಟುಕೊಂಡು ಸಚಿವ ಸ್ಥಾನ ಹಂಚಿಕೆ ನಡೆಯಲಿದೆ. ಗುರುವಾರ ಅಥವಾ ಶನಿವಾರದೊಳಗೆ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ.

ಸಿಎಂ, ಡಿಕೆಶಿಗೆ ಹೈಕಮಾಂಡ್ ಬುಲಾವ್ – ಇಂದು ದೆಹಲಿಯಲ್ಲಿ ಮಹತ್ವದ ಸಭೆ
ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿದೆ. ಬಿ.ಕೆ. ಹರಿಪ್ರಸಾದ್ ಅವರೂ ದೆಹಲಿಗೆ ತೆರಳಲಿದ್ದು, ಮೂವರು ನಾಯಕರು ಕಾಂಗ್ರೆಸ್ ವರಿಷ್ಠರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ನಡೆಯಲಿರುವ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಪ್ರಾದೇಶಿಕ ಪ್ರತಿನಿಧಿತ್ವ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯ ಬಳಿಕವೇ ಸಚಿವರ ಅಂತಿಮ ಪಟ್ಟಿಗೆ ಅಧಿಕೃತ ಅನುಮೋದನೆ ಸಿಗುವ ಸಾಧ್ಯತೆ ಇದೆ.

ದೆಹಲಿ ಪರೇಡ್ ಮುಂದುವರಿಕೆ – ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರ ಕಸರತ್ತು
ಸಚಿವ ಸಂಪುಟ ವಿಸ್ತರಣೆಯ ಸುದ್ದಿ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್‌ನ ಸಚಿವಾಕಾಂಕ್ಷಿ ಶಾಸಕರ ದೆಹಲಿ ಪರೇಡ್ ಜೋರಾಗಿದೆ. ಕಳೆದ ಹಲವು ದಿನಗಳಿಂದ ಸುಮಾರು 30ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲೇ ಬೀಡುಬಿಟ್ಟಿದ್ದು, ಇನ್ನೂ ಹಲವು ಶಾಸಕರು ರಾಜಧಾನಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ತಮ್ಮ ಪರ ಲಾಬಿ ನಡೆಸುತ್ತಿರುವ ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಹೊಸದಾಗಿ ಆಯ್ಕೆಯಾದ ಶಾಸಕರಲ್ಲಿಯೂ ಮಂತ್ರಿಗಿರಿಯ ನಿರೀಕ್ಷೆ ಹೆಚ್ಚಿದ್ದು, ಪ್ರಾದೇಶಿಕ ಸಮತೋಲನ, ಸಾಮಾಜಿಕ ನ್ಯಾಯ ಹಾಗೂ ರಾಜಕೀಯ ಲೆಕ್ಕಾಚಾರಗಳ ನಡುವೆ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲ ರಾಜ್ಯ ರಾಜಕೀಯದಲ್ಲಿ ತೀವ್ರಗೊಂಡಿದೆ. ಈಗ ಎಲ್ಲರ ಚಿತ್ತ ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ನಿರ್ಧಾರದತ್ತ ನೆಟ್ಟಿದೆ.

Share with Friends
author avatar
Digital Desk