
ಆಂಧ್ರಪ್ರದೇಶದಲ್ಲಿ ಮತ್ತೆ ಬಿಸಿಗಾಳಿ , ಉತ್ತರ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ
ನವದೆಹಲಿ,ಜು.12 : ದೇಶದ ಹವಾಮಾನದಲ್ಲಿ ಭಾರಿ ಏರುಪೇರು ಕಂಡುಬರುತ್ತಿದ್ದು, ಒಂದೆಡೆ ಮುಂಗಾರು ಮಳೆ ಅಬ್ಬರಿಸುತ್ತಿದ್ದರೆ, ಮತ್ತೊಂದೆಡೆ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮತ್ತೆ ಬಿಸಿಗಾಳಿ (ಹೀಟ್ವೇವ್) ಆವರಿಸುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಜುಲೈ 12 ರಂದು ಉತ್ತರ, ಪೂರ್ವ ಮತ್ತು ಈಶಾನ್ಯ ಭಾರತದಾದ್ಯಂತ ಮುಂಗಾರು ಮಾರುತಗಳು ತೀವ್ರಗೊಳ್ಳಲಿದ್ದು, ಬಿಹಾರ, ಅಸ್ಸಾಂ ಮತ್ತು ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಬಿಹಾರ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಉತ್ತರಾಖಂಡ, ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ಹಾಗೂ ದೆಹಲಿ-ಎನ್ಸಿಆರ್ ಪ್ರದೇಶಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಮುಂಬರುವ ಇಡೀ ವಾರ ಈ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜಾರ್ಖಂಡ್, ಜಮ್ಮು-ಕಾಶ್ಮೀರ ಮತ್ತು ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಸಿಡಿಲು ಸಹಿತ ಭಾರಿ ಗುಡುಗಿನ ಮುನ್ನೆಚ್ಚರಿಕೆ ನೀಡಲಾಗಿದೆ. ಉತ್ತರಾಖಂಡ ಮತ್ತು ಬಿಹಾರದ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದೇಶದ ಬಹುಭಾಗ ಮಳೆಯಿಂದ ತಂಪಾಗಿದ್ದರೆ, ಕರಾವಳಿ ಆಂಧ್ರಪ್ರದೇಶದಲ್ಲಿ ಮಾತ್ರ ಹವಾಮಾನ ತದ್ವಿರುದ್ಧವಾಗಿದೆ. ಈ ಭಾಗದಲ್ಲಿ ಭಾನುವಾರದಿಂದ ಪ್ರತ್ಯೇಕ ಪ್ರದೇಶಗಳಲ್ಲಿ ತಾಪಮಾನ ತೀವ್ರವಾಗಿ ಏರಲಿದ್ದು, ಒಣ ಹವೆ ಹಾಗೂ ಬಿಸಿಗಾಳಿಯ ವಾತಾವರಣ ನಿರ್ಮಾಣವಾಗಲಿದೆ ಎಂದು ಐಎಂಡಿ ಪ್ರಕಟಣೆಯಲ್ಲಿ ತಿಳಿಸಿದೆ.
