
ದೆಹಲಿ ಅಂಗಳಕ್ಕೆ ಎಸ್ಐಆರ್ ದೂರು
ನವದೆಹಲಿ,ಜು.7: ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಮೈತ್ರಿ ನಾಯಕರ ನಡುವೆ ನಡೆಯುತ್ತಿರುವ ಎಸ್ ಐಆರ್ ಜಟಾಪಟಿ ಇದೀಗ ದೆಹಲಿ ಅಂಗಳ ತಲುಪಿದೆ.
ಸದ್ಯ ಎಸ್ ಐಆರ್ ನಲ್ಲಿ ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದ ಜೆಡಿಎಸ್- ಬಿಜೆಪಿ ನಾಯಕರ ನಿಯೋಗ ಇದೀಗ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದೆ.
ಇನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ನಿಯೋಗವು ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಗೆ ರಾಜ್ಯ ಸರಕಾರ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಹಳಿತಪ್ಪಿರುವ ಬಗ್ಗೆ ವಿಸ್ತೃತವಾಗಿ ದಾಖಲೆಗಳ ಸಮೇತ ದೂರು ಸಲ್ಲಿಸಿತು.

ರಾಜ್ಯದ ಆಡಳಿತ ಯಂತ್ರವನ್ನು, ಅದರಲ್ಲಿಯೂ ಮುಖ್ಯವಾಗಿ ಕೆಲ ಜಿಲ್ಲಾಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಸರ್ಕಾರ ಮತದಾರರ ಪಟ್ಟಿಯನ್ನು ಮನಸೋ ಇಚ್ಚೆ ತಿರುಚಿ ಅಕ್ರಮ ಮತಗಳು ಉಳಿದುಕೊಳ್ಳುವ ರೀತಿಯಲ್ಲಿ ಹುನ್ನಾರ ನಡೆಸುತ್ತಿದೆ ಎಂದು ಹಿರಿಯ ಸಚಿವರಿಬ್ಬರೂ ಮುಖ್ಯ ಚುನಾವಣಾ ಆಯುಕ್ತರಲ್ಲಿ ದೂರಿದ್ದಾರೆ.
ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಅತ್ಯಂತ ವಿವರವಾಗಿ ಮುಖ್ಯ ಚುನಾವಣಾ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ಬಗ್ಗೆ ತಕ್ಷಣ ಗಮನಹರಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು.
ಇದಲ್ಲದೆ, ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಮೇಲುಸ್ತುವಾರಿ ವಹಿಸಲು ಹೊರ ರಾಜ್ಯದ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಕೋರಿದ್ದೇವೆ ಎಂದು ಮಾಹಿತಿ ನೀಡಿದರು
ಕಳೆದ ಏಳು ದಿನಗಳಿಂದ ಆಗಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಗಂಭೀರ ಲೋಪದೋಷಗಳು ಆಗಿವೆ. ಇದೆಲ್ಲವನ್ನು ಸರಿಪಡಿಸುವ ಉದ್ದೇಶದಿಂದ ಈವರೆಗಿನ ಎಲ್ಲಾ ಪ್ರಕ್ರಿಯೆ ಕೈಬಿಡಬೇಕು ಎಂಬುದಾಗಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ನಗರ ಒಂದರಲ್ಲಿಯೇ 25 ಲಕ್ಷಕ್ಕೂ ಹೆಚ್ಚು ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ಇದ್ದಾರೆ ಎಂದು ಕೆಲ ಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಹೀಗಿದ್ದರೂ ಕಾಂಗ್ರೆಸ್ ನಾಟಕ ಆಡುತ್ತಿದೆ. ಬಾಂಗ್ಲಾ ಪ್ರಜೆಗಳು ನಕಲಿ ಆಧಾರ್ ಕಾರ್ಡ್, ವೋಟರ್ ಐಡಿ ಪಡೆದುಕೊಂಡಿದ್ದಾರೆ. ಅವರನ್ನು ಕಂಡು ಹಿಡಿದು ಮತದಾರರ ಪಟ್ಟಿಯಿಂದ ಕಿತ್ತು ಹಾಕಬೇಕೆಂದು ಆಗ್ರಹಿಸಿದರು.
