
ಕಾವೇರಿ ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ – ಎಂದಿನಂತೆ ಜನಜೀವನ
ವಿಜಯಪುರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ರಾಜ್ಯಾದ್ಯಂತ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ವಿಜಯಪುರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಬಂದ್ ಹಿನ್ನೆಲೆ ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಜನಜೀವನ ಎಂದಿನಂತೆ ಸಾಗಿತು. ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಎಂದಿನಂತೆ ಮುಂದುವರಿಯಿತು. ಯಾವುದೇ ಬಸ್ಗಳನ್ನು ಸ್ಥಗಿತಗೊಳಿಸಿರಲಿಲ್ಲ.

ಆಟೋ – ಕ್ಯಾಬ್ ಸೇವೆಯೂ ಎಂದಿನಂತೆ ನಡೆಯಿತು. ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಸಹ ಎಂದಿನಂತೆ ಓಪನ್ ಆಗಿದ್ದವು.
ಆಸ್ಪತ್ರೆ ಮತ್ತು ಮೆಡಿಕಲ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗಲಿಲ್ಲ. ತುರ್ತು ಸೇವೆ ಮತ್ತು ಹಾಲು ಸರಬರಾಜಿಗೆ ಯಾವುದೇ ತೊಂದರೆ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಕೆಲವು ಕನ್ನಡ ಪರ ಸಂಘಟನೆಗಳು ಮಾತ್ರ ಬಂದ್ಗೆ ನೈತಿಕ ಬೆಂಬಲ ಘೋಷಿಸಿದ್ದರೂ, ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿಲ್ಲ. ಅಂಗಡಿ-ಮುಂಗಟ್ಟುಗಳು, ಹೋಟೆಲ್ಗಳು ಎಂದಿನಂತೆ ಕಾರ್ಯನಿರ್ವಹಿಸಿದವು.ಒಟ್ಟಾರೆ ವಿಜಯಪುರದಲ್ಲಿ ಬಂದ್ನ ಯಾವುದೇ ಪರಿಣಾಮ ಕಂಡುಬರಲಿಲ್ಲ.
