
ಪರಾರಿಯಾಗಿದ್ದ ಮೂವರ ಪೈಕಿ ಒಬ್ಬನ ಬಂಧನ..!
ಕಲಬುರಗಿ: ಮಂಗಳವಾರ ನಡೆದ ಕೈದಿಗಳ ಪರಾರಿ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸುಮಾರು 15ರಿಂದ 20 ಅಡಿ ಎತ್ತರದ ಕಾರಾಗೃಹದ ಕಾಂಪೌಂಡ್ ಗೋಡೆ ಹಾರಿ, ಮೂವರು ಕೈದಿಗಳು ಪರಾರಿಯಾಗಿದ್ದರು. ಬಳಿಕ ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಈ ಘಟನೆ ಕಾರಾಗೃಹದ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗೆ ಕಾರಣವಾಗಿತ್ತು.ಪರಾರಿಯಾಗಿದ್ದ ಮೂವರ ಪೈಕಿ ಸಂತೋಷ್ಎಂಬ ಒಬ್ಬ ನನ್ನು ಪೊಲೀಸರು ಬಂಧಿಸಿದ್ದಾರೆ.ಉಳಿದ ಇಬ್ಬರು ಕೈದಿಗಳಾದ ಮಸ್ತಾನ್ ಮತ್ತು ಸಾಗರ್ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಶೋಧ ಕಾರ್ಯಾಚರಣೆ ವೇಳೆ ಕಲಬುರಗಿಯ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಆರೋಪಿ ಸಂತೋಷ್ ಇರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಆರೋಪಿಯನ್ನು ಬಂಧಿಸಲು ಪೊಲೀಸರು ತೆರಳಿದಾಗ, ಅವನು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಪರಿಸ್ಥಿತಿ ನಿಯಂತ್ರಿಸಲು ಹಾಗೂ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಆತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳು ಗಾಯಗೊಂಡಿದ್ದುರು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಕೈದಿ ಸಂತೋಷ್ನನ್ನೂ ಸಹ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಕಲಬುರಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ.
