BlogEntertainmentLatestಸ್ಯಾಂಡಲ್​ವುಡ್-Sandalwood

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಉಪ್ಪಿ ಹೊಸ ಸಿನಿಮಾ ಅನೌನ್ಸ್, ಪೋಸ್ಟರ್ ರಿಲೀಸ್

ರಿಯಲ್‌ಸ್ಟಾರ್ ಉಪೇಂದ್ರ ಅವರು ಇಂದು 56ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಫ್ಯಾನ್ಸ್ ಜೊತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಉಪ್ಪಿ ಬಹಳ ದಿನಗಳವರೆಗೆ ನಿರ್ದೇಶಿಸಿ ‘ಯುಐ’ ಸಿನಿಮಾ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದೆ ವೇಳೆ “45”ರ ಪೋಸ್ಟರ್ ಬಿಡುಗಡೆಯಾಗಿದೆ. ಉಪೇಂದ್ರ ಅವರ ನಿವಾಸಕ್ಕೆ “45” ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಶಿವಣ್ಣ, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ.

ಉಪೇಂದ್ರ ಅಭಿನಯದ ಯುಐ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಉಪೇಂದ್ರಗೆ ಜೋಡಿಯಾಗಿ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಈ ಚಿತ್ರಕ್ಕೆ ಲಹರಿ ಸಂಸ್ಥೆಯ ಮನೋಹರ್ ನಾಯ್ಡು ಮತ್ತು ಕೆ.ಪಿ ಶ್ರೀಕಾಂತ್ ಬಂಡವಾಳ ಹೂಡಿದ್ದಾರೆ. ದಸರಾ ಹಬ್ಬದ ವೇಳೆ, ಇದೇ ಅಕ್ಟೋಬರ್‌ನಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಅಕ್ಟೋಬರ್‌ನಿಂದ ಯುಐ ಹಬ್ಬ ಶುರುವಾಗಲಿದೆ. ಈ ಚಿತ್ರಕ್ಕೆ ನಟಿಸುವುದರ ಜೊತೆಗೆ ಉಪೇಂದ್ರ ನಿರ್ದೇಶನ ಕೂಡ ಮಾಡಿದ್ದಾರೆ.

‘ತರ್ಲೆ ನನ್ಮಗ’, ‘ಶ್’, ‘ಸ್ವಸ್ತಿಕ್’ ಹಾಗು ‘ಓಂ’ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಿರ್ದೇಶಕರೆಂದು ಕರೆಸಿಕೊಂಡ ನಟ ಹಾಗು ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ. ನಂತರದಲ್ಲಿ ‘ಎ’, ‘ಉಪೇಂದ್ರ’, ‘ಸೂಪರ್’ನಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ಅಭಿನಯ ಮಾತ್ರವಲ್ಲದೇ ನಿರ್ದೇಶನವನ್ನೂ ಮಾಡಿರುವ ಅಭಿಮಾನಿಗಳ ‘ಬುದ್ಧಿವಂತ ನಟ’ ಉಪೇಂದ್ರ ಅವರು 56ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

“UI” ಚಿತ್ರದ ಬಗ್ಗೆ ಉಪ್ಪಿ ಮಾತು :
ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ “UI” ಚಿತ್ರದ ಬಗ್ಗೆ ಮಾತನಾಡಿ, ಹೆಚ್ಚಿನ ಮಾಹಿತಿ ನೀಡಿದ್ದಾರೆ‌. ಹುಟ್ಟುಹಬ್ಬದ ದಿನ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ “UI” ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನಟ, ನಿರ್ದೇಶಕ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್, ಕೆ.ಪಿ.ಶ್ರೀಕಾಂತ್, ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು(ಲಹರಿ ವೇಲು), ನಾಯಕಿ ರೀಶ್ಮಾ ನಾಣಯ್ಯ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಕಲಾ ನಿರ್ದೇಶಕ ಶಿವಕುಮಾರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ “UI” ಚಿತ್ರದ ವಿಭಿನ್ನ ಪೋಸ್ಟರ್ ಸಹ ಬಿಡುಗಡೆಯಾಗಿದೆ.

ನನ್ನ‌ ಹುಟ್ಟುಹಬ್ಬಕ್ಕೆ ಹಾರೈಸಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತನಾಡಿದ ಉಪೇಂದ್ರ ಅವರು, ಐದಾರು ಮದುವೆ ಆಗಬಹುದು. ಆದರೆ ಒಂದು ಚಿತ್ರ ನಿರ್ದೇಶನ ಮಾಡುವುದು ಅದಕ್ಕಿಂತ ಕಷ್ಟ. ಇನ್ನೂ ನಾನು ಬಹಳ ವರ್ಷಗಳ ನಂತರ ನಿರ್ದೇಶಿಸಿರುವ “UI” ಚಿತ್ರ ಬಿಡುಗಡೆಯ ಹಂತಕ್ಕೆ ತಲುಪಿದೆ. ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿರುವ ನಿರ್ಮಾಪಕರು ಅಕ್ಟೋಬರ್ ನಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ. ತಾಂತ್ರಿಕ (ಟೆಕ್ನಿಕಲ್) ಕಾರ್ಯಗಳು ಹೆಚ್ಚಾಗಿರುವುದು ಹಾಗೂ ಸಿನಿಮಾ ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ಬರುತ್ತಿರುವುದರಿಂದ ಬಿಡುಗಡೆ ಸ್ವಲ್ಪ ವಿಳಂಬವಾಗುತ್ತಿದೆ. ಜನರು ಯಾವಗಲೂ ನನಗೆ ತಲೆಯಲ್ಲಿ ಹುಳ ಬಿಡುತ್ತೀರಾ ಎನ್ನುತ್ತಾರೆ. ಅದರೆ ಈ ಚಿತ್ರದಲ್ಲಿ ಹುಳ ತೆಗೆಯುವ ಕೆಲಸ ಮಾಡುತ್ತಿದ್ದೇನೆ. ಪ್ರೇಕ್ಷಕರು ನಮಗಿಂತ ತುಂಬಾ ಬುದ್ದಿವಂತರು. ಅವರ ನಿರೀಕ್ಷೆ ಹೆಚ್ಚು ಇರುತ್ತದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಎಲ್ಲಾ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ “UI” ಉತ್ತಮ ಚಿತ್ರವಾಗಿ ಬರಲಿದೆ ಎಂದರು.

ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ನಿರ್ಮಾಪಕ ಜಿ.ಮನೋಹರನ್, ಇದು ಪ್ಯಾನ್ ಇಂಡಿಯಾ ಚಿತ್ರವಾಗಿರುವು ದರಿಂದ ಬಿಡುಗಡೆ ಸ್ವಲ್ಪತಡವಾಯಿತು. ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದರು. 25 ವರ್ಷಗಳ ನನ್ನ ಸಿನಿ ಜರ್ನಿಯಲ್ಲಿ ಶಿವಣ್ಣ ಅವರ ಜೊತೆಗಿನ ಒಡನಾಟ ಹಾಗೂ ಉಪೇಂದ್ರ ಅವರು ನಮ್ಮ ಬ್ಯಾನರ್ ನ ಚಿತ್ರವನ್ನು ನಿರ್ದೇಶಿಸಿರುವುದು ನನಗೆ ತುಂಬಾ ಖುಷಿಕೊಟ್ಟ ವಿಚಾರ. ಎಲ್ಲರಂತೆ ನಾನು ಉಪೇಂದ್ರ ಅವರ ನಿರ್ದೇಶನಕ್ಕೆ ಅಭಿಮಾನಿ. ಈ ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅವರ ಅಭಿಮಾನಿಗಳಂತೆ ನನಗೂ ಇದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು ನಿರ್ಮಾಪಕ ಕೆ.ಪಿ.ಶ್ರೀಕಾಂತ್. ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು(ಲಹರಿ ವೇಲು), ನಾಯಕಿ ರೀಶ್ಮಾ ನಾಣಯ್ಯ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಅವರು “UI” ಚಿತ್ರದ ಬಗ್ಗೆ ಮಾತನಾಡಿದರು.

Share with Friends
author avatar
News Desk